Summary: ಸುಪ್ರೀಂ ಕೋರ್ಟ್, ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮದವರಿಗಷ್ಟೇ ಪರಿಶಿಷ್ಟ ಜಾತಿ ಸ್ಥಾನಮಾನ ಅನ್ವಯಿಸುತ್ತದೆ ಎಂಬ ಹೈಕೋರ್ಟ್ ತೀರ್ಪನ್ನು ಸಮರ್ಥಿಸಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆಯು ಲಭ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ನವದೆಹಲಿ: ಹಿಂದೂ, ಸಿಖ್ ಹಾಗೂ ಬೌದ್ಧ ಧರ್ಮದವರನ್ನಷ್ಟೇ ಪರಿಶಿಷ್ಟ ಜಾತಿಯವರಾಗಿ ಪರಿಗಣಿಸಬಹುದು ಎಂಬ ಆಂಧ್ರಪ್ರದೇಶ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಸಮರ್ಥಿಸಿದೆ.
ಮತಾಂತರಗೊಂಡ ಕ್ರೈಸ್ತ ಪಾದ್ರಿಯೊಬ್ಬರು ತಮ್ಮ ಮೇಲೆ ಜಾತಿಯ ಆಧಾರದ ಮೇಲೆ ದೌರ್ಜನ್ಯ ನಡೆದಿದೆ ಎಂದು ಹೇಳಿ ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿಗಳಾದ ಪಿ.ಕೆ.ಮಿಶ್ರಾ ಮತ್ತು ಮನಮೋಹನ್ ಅವರ ಪೀಠ ಈ ತೀರ್ಪು ನೀಡಿದೆ.
ತೀರ್ಪಿನಲ್ಲಿ, ಅರ್ಜಿದಾರರು ತಮ್ಮ ಮೂಲ ಧರ್ಮಕ್ಕೆ ಮರಳಿದ್ದಾರೆ ಅಥವಾ ಮಾದಿಗ ಸಮುದಾಯಕ್ಕೆ ಸೇರಿದ್ದಾರೆ ಎಂಬುದನ್ನು ಸಾಬೀತುಪಡಿಸಲಾಗಿಲ್ಲ ಎಂದು ಕೋರ್ಟ್ ತಿಳಿಸಿದೆ. ಅವರು ಕ್ರೈಸ್ತ ಧರ್ಮವನ್ನು ಅನುಸರಿಸುತ್ತಿದ್ದು, ಪಾದ್ರಿಯಾಗಿ ಪ್ರಾರ್ಥನೆಗಳನ್ನು ನಡೆಸುತ್ತಿರುವುದು ದೃಢಪಟ್ಟಿದೆ. ಹೀಗಾಗಿ, ಘಟನೆ ನಡೆದ ಸಮಯದಲ್ಲಿ ಅವರು ಕ್ರೈಸ್ತರಾಗಿದ್ದರೆಂಬುದು ಸ್ಪಷ್ಟವಾಗಿದೆ ಎಂದು ಕೋರ್ಟ್ ಹೇಳಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸುವುದಿಲ್ಲ. ಇಂತಹವರು ತಮ್ಮ ಪರಿಶಿಷ್ಟ ಜಾತಿ ಗುರುತನ್ನು ಕಳೆದುಕೊಳ್ಳುತ್ತಾರೆ ಮತ್ತು ಎಸ್ಸಿ-ಎಸ್ಟಿ ಕಾಯ್ದೆಯಡಿ ರಕ್ಷಣೆಗೆ ಅರ್ಹರಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಪ್ರಕರಣದ ಹಿನ್ನೆಲೆ:
ಆಂಧ್ರಪ್ರದೇಶದ ಚಿಂತದ ಆನಂದ್ ಎಂಬ ಪಾದ್ರಿ ತಮ್ಮ ಗ್ರಾಮದಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ನಡೆಸುತ್ತಿದ್ದರು. ಅಕ್ಕಲ ರಾಮಿ ರೆಡ್ಡಿ ಸೇರಿದಂತೆ ಕೆಲವರು ತಮ್ಮ ಮೇಲೆ ಹಲ್ಲೆ ನಡೆಸಿ, ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್ ಅವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಪರಿಶಿಷ್ಟ ಜಾತಿ ಹಕ್ಕುಗಳಿಗೆ ಅರ್ಹರಲ್ಲ ಎಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್ ಸಹ ಈಗ ಮಾನ್ಯಗೊಳಿಸಿದೆ.














