ಗದಗ: ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದ ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ ಅವರ 10ನೇ ವರ್ಷದ ವಿಜ್ಞಾನ ವಿಸ್ಕೃತ ಕಾರ್ಯಕ್ರಮ ಹಾಗೂ 2025ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.
“ಬಸವಣ್ಣನವರ ನಾಡಿನಲ್ಲಿ ಜನಿಸಿದ ನಾವು ಇಂದಿಗೂ ಮೌಢ್ಯಗಳು ಹಾಗೂ ಕಂದಾಚಾರಗಳನ್ನು ಆಚರಿಸುತ್ತಿರುವುದು ನಿಜಕ್ಕೂ ದುರ್ದೈವಕರ ಸಂಗತಿ. ಮೌಢ್ಯ ಮತ್ತು ಅಂಧಶ್ರದ್ಧೆಗಳಿಗೆ ಅಂತ್ಯವಾಗಬೇಕು. ಭ್ರಾತೃತ್ವ, ಸ್ವಾತಂತ್ರ್ಯ ಮತ್ತು ಸಮಾನತೆ ಎಂಬ ಮೌಲ್ಯಗಳನ್ನು ನಮ್ಮ ಸಂವಿಧಾನ ನೀಡಿದೆ. ಅವುಗಳನ್ನು ಅಕ್ಷರಶಃ ಜಾರಿಗೆ ತರದೆ ಹೋದರೆ, ಜಾತಿ ವ್ಯವಸ್ಥೆಯೂ ಅಸಮಾನತೆಯೂ ನಿರ್ಮೂಲವಾಗುವುದಿಲ್ಲ. ಮಾನವರಾಗಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಶಿಕ್ಷಣ ಅತ್ಯಂತ ಅಗತ್ಯ” ಎಂದು ಹೇಳಿದರು.
“ಎಲ್ಲ ಧರ್ಮಗಳೂ ಮಾನವೀಯತೆಯನ್ನು ಬೋಧಿಸುತ್ತವೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಧರ್ಮವನ್ನು ತಪ್ಪಾಗಿ ಅರ್ಥೈಸಿ ಸಮಾಜವನ್ನು ದಾರಿ ತಪ್ಪಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಅದನ್ನು ಹಣೆಬರಹವೆಂದು ಒಪ್ಪಿಕೊಂಡು ಸುಮ್ಮನಿರದೆ, ಇಚ್ಛಾಶಕ್ತಿ ಮತ್ತು ಶ್ರಮದೊಂದಿಗೆ ಪ್ರಯತ್ನಿಸಿದರೆ ಯಾವುದೇ ವರ್ಗದವರೂ ಸಾಧನೆ ಮಾಡಬಹುದು. ಶಿಕ್ಷಣವು ಯಾವುದೇ ಒಂದು ವರ್ಗಕ್ಕೆ ಸೀಮಿತವಾದುದಲ್ಲ. ಪ್ರಾಮಾಣಿಕ ಪ್ರಯತ್ನ ಮತ್ತು ಅವಕಾಶಗಳ ಸದುಪಯೋಗದ ಮೂಲಕ ಉನ್ನತ ಸ್ಥಾನಕ್ಕೆ ತಲುಪಲು ಸಾಧ್ಯ. ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಬೆಳೆಸುವುದೇ ವಿಜ್ಞಾನದ ಮೂಲ ಉದ್ದೇಶ” ಎಂದರು.

ಒಮ್ಮೆ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಬಿ.ಎಸ್.ಪಾಟೀಲರೊಂದಿಗೆ ಪ್ರವಾಸ ಮಾಡುವ ಅವಕಾಶ ನನಗೆ ದೊರೆತಿತ್ತು. ರೈತ ಕುಟುಂಬದಿಂದ ಬಂದ ಅವರು ವಿದ್ಯಾಭ್ಯಾಸ ಮಾಡಿ ಸೈನ್ಯ ಸೇರಿ, ನಂತರ ಐಎಎಸ್ ಅಧಿಕಾರಿಯಾಗಿದ್ದರು. ಅಪಘಾತದಿಂದ ಸಂಕಷ್ಟ ಎದುರಾದರೂ, ಅವರ ಅಚಲ ಇಚ್ಛಾಶಕ್ತಿಯಿಂದ ಐಎಎಸ್ ಉತ್ತೀರ್ಣರಾಗಲು ಸಾಧ್ಯವಾಯಿತು. ಅವರು ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದು, ಸದಾ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದರು. ನಾಡಿನ ಅಭಿವೃದ್ಧಿಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು” ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.
“ಜೆ.ಎಚ್.ಪಟೇಲರ ಅವಧಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಅವರು ಬಹುಮುಖ್ಯ ಕೆಲಸಗಳನ್ನು ನಿರ್ವಹಿಸಿದರು. ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ವಿಭಜನೆಗಾಗಿ ಪಾಟೀಲರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಈಗಲೂ ಅವರ ಅಧ್ಯಕ್ಷತೆಯಲ್ಲಿಯೇ ಸಮಿತಿ ರಚನೆಯಾಗಿ ವರದಿ ಸಲ್ಲಿಸಲಾಗಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಐದು ಕಾರ್ಪೋರೇಷನ್ಗಳಾಗಿ ನಗರವನ್ನು ವಿಭಜಿಸಲಾಗಿದೆ. ಪಾಟೀಲರು ಈ ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರನ್ನು ಗುರುತಿಸಿ ಚಂದನ ಎಜುಕೇಶನಲ್ ಸಂಸ್ಥೆ ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ” ಎಂದು ಹೇಳಿದರು.

“ಸಿ.ಎನ್.ಆರ್.ರಾವ್ ಅವರು ಈ ದೇಶ ಕಂಡ ಅಪರೂಪದ ವಿಜ್ಞಾನಿ. ಎಸ್ಎಸ್ಎಲ್ಸಿ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ವಿದ್ಯಾಭ್ಯಾಸ ಮಾಡಿದವರು. ಪಾಟೀಲರು ಆಂಗ್ಲ ಮಾಧ್ಯಮದಲ್ಲಿ ಕಲಿತವರು. ಸಿ.ಎನ್.ಆರ್. ರಾವ್ ವಿಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ ಎತ್ತರವನ್ನು ತಲುಪಿದವರು. ಸಂಶೋಧನೆಯನ್ನೇ ಜೀವನವಾಗಿಸಿಕೊಂಡಿದ್ದ ಅವರಿಗೆ ಅವರ ಧರ್ಮಪತ್ನಿ ಸದಾ ಬೆಂಬಲವಾಗಿ ನಿಂತಿದ್ದರು” ಎಂದು ಹೇಳಿದರು.
“ದೇಶದ ಪ್ರಧಾನಿ ಜವಾಹರಲಾಲ್ ನೆಹರು ಅವರು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದ್ದರು. ಚಂದನ ಶ್ರೀ ವಿದ್ಯಾಲಯದಲ್ಲಿ ವಿಜ್ಞಾನ ಹಾಗೂ ವೈಚಾರಿಕತೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಅತ್ಯಂತ ಉತ್ತಮ ಬೆಳವಣಿಗೆಯಾಗಿದೆ” ಎಂದು ಶ್ಲಾಘಿಸಿದರು.














