ಬೆಂಗಳೂರು: ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಜನ ವಾಸಕ್ಕೆ ಯೋಗ್ಯವಲ್ಲದ ಜಾಗದಲ್ಲಿ ಕೆಲವರು ಅತಿಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅಲ್ಲಿ ವಾಸಿಸುತ್ತಿದ್ದ ಕುಟುಂಬಗಳಿಗೆ ಹಲವು ಬಾರಿ ಪರ್ಯಾಯ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ನೋಟೀಸ್ ನೀಡಲಾಗಿದ್ದರೂ ಅವರು ಸ್ಪಂದಿಸದ ಕಾರಣ, ಅನಿವಾರ್ಯವಾಗಿ ಆ ಜಾಗವನ್ನು ತೆರವುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರೊಂದಿಗೆ ಚರ್ಚಿಸಿ, ತೆರವುಗೊಳಿಸಲ್ಪಟ್ಟ ಎಲ್ಲರಿಗೂ ತಾತ್ಕಾಲಿಕ ಆಶ್ರಯ, ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದ್ದೇನೆ. ಅತಿಕ್ರಮವಾಗಿ ವಾಸವಿದ್ದವರಲ್ಲಿ ಬಹುತೇಕರು ವಲಸೆ ಕಾರ್ಮಿಕರಾಗಿದ್ದು, ಸ್ಥಳೀಯ ನಿವಾಸಿಗಳಲ್ಲ. ಆದರೂ ಮಾನವೀಯ ದೃಷ್ಟಿಯಿಂದ ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬುಲ್ಡೋಜರ್ ನ್ಯಾಯ ಮತ್ತು ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡುವೆ ಭಾರೀ ವ್ಯತ್ಯಾಸವಿದೆ. ವಾಸ್ತವ ಸಂಗತಿಗಳನ್ನು ತಿಳಿಯದೇ ರಾಜಕೀಯ ಉದ್ದೇಶದಿಂದ ಪಿಣರಾಯಿ ವಿಜಯನ್ ಟೀಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದರು.














