ಕಾಸರಗೋಡು ಜಿಲ್ಲೆಯ ಕನ್ನಡ ಮಾತನಾಡುವ ಅಲ್ಪಸಂಖ್ಯಾತರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆ ಇರುವ ಮಲಯಾಳಂ ಭಾಷಾ ಕಡ್ಡಾಯ ಮಸೂದೆಯನ್ನು ತಡೆಹಿಡಿಯುವಂತೆ ಆಗ್ರಹಿಸಿ, ಕರ್ನಾಟಕದ ರಾಜ್ಯ ನಿಯೋಗವು ಕೇರಳ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಕೆಬಿಎಡಿಎ)ದ ನಿಯೋಗವು ಬುಧವಾರ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ, ಗಡಿ ಪ್ರದೇಶದಲ್ಲಿರುವ ಕನ್ನಡ ಭಾಷಿಕರ ಮೇಲೆ ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆ–2025 ಉಂಟುಮಾಡಬಹುದಾದ ಪರಿಣಾಮಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿತು. ಮಸೂದೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿ ಮರುಪರಿಶೀಲನೆ ನಡೆಸುವಂತೆ ಒತ್ತಾಯಿಸಿ ಜ್ಞಾಪಕ ಪತ್ರವನ್ನು ಸಲ್ಲಿಸಲಾಯಿತು.
ಜ್ಞಾಪಕ ಪತ್ರದಲ್ಲಿ, ಕೆಬಿಎಡಿಎ ಕಾರ್ಯದರ್ಶಿ ಪ್ರಕಾಶ್ ವಿ.ಮಟ್ಟಿಹಳ್ಳಿ, ‘ಕೇರಳ ವಿಧಾನಸಭೆ ಇತ್ತೀಚೆಗೆ ಅಂಗೀಕರಿಸಿದ ಈ ಮಸೂದೆ ಅಸಂವಿಧಾನಿಕವಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ವಾಸಿಸುವ ದೊಡ್ಡ ಪ್ರಮಾಣದ ಕನ್ನಡ ಭಾಷಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ’ ಎಂದು ಹೇಳಿದ್ದಾರೆ. 2017ರಲ್ಲಿ ಇಂತಹದೇ ಮಸೂದೆಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದುದನ್ನು ನಿಯೋಗವು ರಾಜ್ಯಪಾಲರ ಗಮನಕ್ಕೆ ತಂದಿತು.
ಶಿಕ್ಷಣ ವ್ಯವಸ್ಥೆಗೆ ಹೊಡೆತದ ಭೀತಿ
ಮಲಯಾಳಂ ಭಾಷಾ ಮಸೂದೆ–2025ರ ಸೆಕ್ಷನ್ 2(6) ಅನ್ವಯ, ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಪ್ರಸ್ತಾವನೆಗೆ ನಿಯೋಗ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಪ್ರಸ್ತುತ ಕಾಸರಗೋಡು ಮೊದಲಾದ ಭಾಷಾ ವೈವಿಧ್ಯಮಯ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಯುತ್ತಿದ್ದು, ಹಿಂದಿ, ಸಂಸ್ಕೃತ ಅಥವಾ ಉರ್ದು ಮುಂತಾದ ಭಾಷೆಗಳನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಹೊಸ ಮಸೂದೆ ಜಾರಿಯಾದರೆ ಈ ಆಯ್ಕೆ ಹಕ್ಕಿಗೆ ಧಕ್ಕೆ ಉಂಟಾಗುತ್ತದೆ ಎಂದು ಅವರು ಎಚ್ಚರಿಸಿದರು.
ಮಲಯಾಳಂ ಅನ್ನು ಕಡ್ಡಾಯವಾಗಿ ಪ್ರಥಮ ಭಾಷೆಯಾಗಿ ಜಾರಿಗೊಳಿಸುವುದು ಕನ್ನಡ ಮಾತನಾಡುವ ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಒತ್ತಡವನ್ನು ಸೃಷ್ಟಿಸಲಿದೆ. ವಿಶೇಷವಾಗಿ ಕೇರಳದ ಹೊರಗೆ ಉನ್ನತ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಮತ್ತು ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಪರ ಬದುಕಿನ ಮೇಲೆ ದೀರ್ಘಕಾಲೀನ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಆರೋಪ
ಭಾಷಾ ಅಲ್ಪಸಂಖ್ಯಾತರ ರಕ್ಷಣೆಗೆ ಸಂಬಂಧಿಸಿದಂತೆ ಸಂವಿಧಾನದ ವಿಧಿಗಳು 30, 347, 350, 350ಎ ಮತ್ತು 350ಬಿ ಅನ್ವಯ ರಾಜ್ಯಗಳಿಗೆ ಇರುವ ಜವಾಬ್ದಾರಿಯನ್ನು ಈ ಮಸೂದೆ ಉಲ್ಲಂಘಿಸುತ್ತದೆ ಎಂದು ನಿಯೋಗ ವಾದಿಸಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಈ ಕುರಿತು ಕೇರಳ ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ಸಲಹೆ ನೀಡಿರುವುದನ್ನೂ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದೇ ಸಂದರ್ಭದಲ್ಲಿ,
- ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕಡ್ಡಾಯ ನೇಮಕ,
- ಪೊಲೀಸ್ ಠಾಣೆ, ರೈಲು ನಿಲ್ದಾಣ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕನ್ನಡ ನಾಮಫಲಕಗಳ ಅಳವಡಿಕೆ,
- ಸರ್ಕಾರಿ ಕಚೇರಿಗಳ ಅಧಿಕೃತ ವ್ಯವಹಾರಗಳಲ್ಲಿ ಕನ್ನಡ ಬಳಕೆ,
- ಸ್ಥಳೀಯ ಭಾಷಾ ಅಲ್ಪಸಂಖ್ಯಾತರ ಜನಸಂಖ್ಯೆ ಆಧರಿಸಿ ಉದ್ಯೋಗ ನೇಮಕಾತಿ
ಇವುಗಳನ್ನು ಖಚಿತಪಡಿಸಬೇಕೆಂದು ನಿಯೋಗವು ರಾಜ್ಯಪಾಲರ ಮುಂದೆ ಬೇಡಿಕೆ ಇಟ್ಟಿತು. ಜೊತೆಗೆ, ಕಾಸರಗೋಡು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯ ಮೂಲಕ ದ್ವೈಮಾಸಿಕ ಸಭೆಗಳನ್ನು ನಡೆಸುವಂತೆ ಕೋರಲಾಯಿತು.
ಮಸೂದೆ ಪರಿಶೀಲನೆಗೆ ಭರವಸೆ
ಮನವಿ ಸ್ವೀಕರಿಸಿದ ಕೇರಳ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು, ‘ಮಲಯಾಳಂ ಕಡ್ಡಾಯ ಭಾಷಾ ಮಸೂದೆಯನ್ನು ಸೂಕ್ಷ್ಮವಾಗಿ ಮರುಪರಿಶೀಲಿಸಲಾಗುವುದು’ ಎಂದು ನಿಯೋಗಕ್ಕೆ ಭರವಸೆ ನೀಡಿದರು. ಕಾಸರಗೋಡು ಜಿಲ್ಲೆಯ ಕನ್ನಡ ಭಾಷಿಕರ ಸಂವಿಧಾನಾತ್ಮಕ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಮಸೂದೆಯನ್ನು ಪರಿಶೀಲನೆಗಾಗಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಕೆಬಿಎಡಿಎ ಕಾರ್ಯದರ್ಶಿ ಮಟ್ಟಿಹಳ್ಳಿ ತಿಳಿಸಿದ್ದಾರೆ.
ಗಡಿನಾಡಿನ ಕನ್ನಡ ಮತ್ತು ತಮಿಳು ಭಾಷಿಕರ ಮೇಲೆ ಮಲಯಾಳಂ ಹೇರಿಕೆಯ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಮಸೂದೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಆದರೆ 2025ರ ಹೊಸ ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ರಕ್ಷಣೆಗೆ ಕೆಲವು ವಿಶೇಷ ನಿಬಂಧನೆಗಳನ್ನು ಸೇರಿಸಲಾಗಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.














