ಕೋಲ್ಕತ್ತಾ: ಅಗತ್ಯ ಬಿದ್ದರೆ ದೆಹಲಿಗೆ ಹೋಗಿ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ವತಿಯಿಂದ ಕೋಲ್ಕತ್ತಾದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಪಕ್ಷದ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಇಂಡಿಯಾ ಮೈತ್ರಿಕೂಟದ ಅಡಿಯಲ್ಲಿ ಎಲ್ಲರೂ ಒಂದಾಗಬೇಕೆಂದು ನಾನು ಬಯಸುತ್ತೇನೆ” ಎಂದು ಹೇಳಿದರು. “ನನಗೆ ಯಾವುದೇ ಅಹಂಕಾರವಿಲ್ಲ. ಇತರರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಟ್ಟಾಗಿ ಹೋರಾಡಲು ಮುಂದಾಗಬೇಕೆಂದು ನಾನು ಒತ್ತಾಯಿಸುತ್ತೇನೆ. ಅಗತ್ಯ ಬಿದ್ದರೆ, ನಾನು ದೆಹಲಿಗೆ ಹೋಗಿ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆಯಲ್ಲೂ ಭಾಗವಹಿಸುತ್ತೇನೆ” ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಸೇರಿದಂತೆ ಎಡ ಪಕ್ಷಗಳ ವಿರುದ್ಧ ನಿರಂತರವಾಗಿ ರಾಜಕೀಯ ನಡೆಸುತ್ತಿರುವ ಮಮತಾ ಬ್ಯಾನರ್ಜಿ, ಈಗ ತಮ್ಮ ನಿಲುವನ್ನು ಬದಲಾಯಿಸಿಕೊಂಡಿದ್ದಾರೆ. ಅವರು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಪಕ್ಷಗಳೊಂದಿಗೆ ಕೆಲಸ ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯ ನಂತರ ತೃಣಮೂಲ ಕಾಂಗ್ರೆಸ್ ಇಬ್ಭಾಗವಾಗಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿರುವುದು ಗಮನಾರ್ಹ.
ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತೊರೆದವರನ್ನು ಮಮತಾ ಬ್ಯಾನರ್ಜಿ ತೀವ್ರವಾಗಿ ಟೀಕಿಸಿದ್ದು, ಮತ್ತೆ ಅವರನ್ನು ಪಕ್ಷಕ್ಕೆ ಸೇರಿಸುವುದಿಲ್ಲ ಎಂದು ಹೇಳಿದರು. “ಪಕ್ಷ ತೊರೆದ ದ್ರೋಹಿಗಳು ನೇರವಾಗಿ ಬಿಜೆಪಿ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅವರಿಗೆ ನಾನು ಸವಾಲು ಹಾಕುತ್ತೇನೆ. ನೀವು ಬಿಜೆಪಿಯನ್ನು ಬೆಂಬಲಿಸಲು ಬಯಸಿದರೆ ಬಿಜೆಪಿಗೆ ಹೋಗಿ. ನೀವು ಹೆಚ್ಚು ಹೋದಷ್ಟು ನನಗೆ ಸಂತೋಷ. ಬಿಜೆಪಿಗೆ ಹೋದ ಕಳ್ಳರನ್ನು ನಾನು ಎಂದಿಗೂ ಮರಳಿ ಸ್ವೀಕರಿಸುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದರು.
“ಪಕ್ಷದ ಎರಡು ಹೂವಿನ ಚಿಹ್ನೆಯನ್ನು ಕಸಿದುಕೊಳ್ಳುವ ಪ್ರಯತ್ನ ನಡೆದಿದೆ” ಎಂದು ಹೇಳಿರುವ ಮಮತಾ ಬ್ಯಾನರ್ಜಿ, “ಆದರೆ ತಾವು ಪಕ್ಷದ ಸ್ಥಾಪಕಿ ಮತ್ತು ಅಧ್ಯಕ್ಷೆಯಾಗಿರುವುದರಿಂದ ಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು. ಅಲ್ಲದೇ ಶೀಘ್ರದಲ್ಲೇ ಪಶ್ಚಿಮ ಬಂಗಾಳದಾದ್ಯಂತ ಪ್ರವಾಸ ಮಾಡುವುದಾಗಿಯೂ ಅವರು ಹೇಳಿದರು.














