ಬೆಂಗಳೂರು, ಜುಲೈ 23: ಎಸ್ಐಆರ್ (Special Intensive Revision), ಶ್ರೀರಾಮ ಮಂದಿರದ ದುರಾಡಳಿತ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರಗಳನ್ನು ಖಂಡಿಸಿ ಬೆಂಗಳೂರು ನಗರ ಪೂರ್ವ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಪೂರ್ವ ಜಿಲ್ಲಾ ಅಧ್ಯಕ್ಷ ಡಿ.ಕೆ. ಮೋಹನ್ ಬಾಬು ಅವರ ಗೃಹ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಸಚಿವೆ ರಾಣಿ ಸತೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಮೋಹನ್ ಬಾಬು, “ಶ್ರೀರಾಮ ದೇಗುಲದ ಚಂದಾ ಅಕ್ರಮದ ಕಿಂಗ್ಪಿನ್ ಯಾರು ಎಂಬುದು ಗೊತ್ತಿದ್ದರೂ ಇದುವರೆಗೂ ಅವರನ್ನು ಬಂಧಿಸಿಲ್ಲ. ಬಹಳ ವರ್ಷಗಳಿಂದ ನಡೆಯುತ್ತಿರುವ ಅಕ್ರಮಗಳಿದ್ದರೂ ಪ್ರಮುಖ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮ ಬಯಲಾದ ಬಳಿಕ 15 ದಿನಗಳ ಕಾಲ ಸರ್ಕಾರ ಮೌನ ವಹಿಸಿತು. ನಂತರ ಚಾಲಕರು, ಕ್ಲರ್ಕ್ಗಳು ಹಾಗೂ ಅಟೆಂಡರ್ಗಳನ್ನಷ್ಟೇ ಬಂಧಿಸಲಾಯಿತು. ಆದರೆ ಹಣಕಾಸು ನಿರ್ವಹಣೆ ಮಾಡಿದ್ದ ಪ್ರಮುಖ ಆರೋಪಿಗಳನ್ನು ಬಂಧಿಸದೇ, ಸ್ವತಂತ್ರ ಎಸ್ಐಟಿ ರಚಿಸದೇ ಇಡೀ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ಮಾಡಲಾಗಿದೆ. ಇದು ರಾಷ್ಟ್ರದ ಜನತೆಗೆ ಮಾಡಿದ ಅನ್ಯಾಯವಾಗಿದ್ದು, ಭಗವಂತನ ಮೇಲಿನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ,” ಎಂದು ಕಿಡಿಕಾರಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಮಾತನಾಡಿದ ಅವರು, “ಇದುವರೆಗೂ ಸುಮಾರು 21 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದ ಭವಿಷ್ಯವಾಗಬೇಕಿದ್ದ ಮಕ್ಕಳನ್ನು ನಾವು ಕಳೆದುಕೊಂಡಿದ್ದೇವೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಮಧ್ಯಪ್ರದೇಶದ ವ್ಯಾಪಂ ಹಗರಣದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿತ್ತು. ಆತ್ಮಹತ್ಯೆಗಳು, ಕೊಲೆಗಳು ನಡೆದರೂ ಎಲ್ಲವನ್ನೂ ಮುಚ್ಚಿಹಾಕುವ ಪ್ರಯತ್ನ ನಡೆದಿದೆ,” ಎಂದು ಆರೋಪಿಸಿದರು.

“ದೇಶದ ಯುವಕರು ಈಗ ಜಾಗೃತರಾಗಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಒಂದು ರಾಷ್ಟ್ರ ಬಲಿಷ್ಠವಾಗಬೇಕಾದರೆ ಶಿಕ್ಷಣ ವ್ಯವಸ್ಥೆ ಗಟ್ಟಿಯಾಗಿರಬೇಕು. ಆದರೆ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಮೂಲಕ ಮಕ್ಕಳ ಭವಿಷ್ಯವನ್ನು ಹಾಳು ಮಾಡುವ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಈ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದು, ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಮಕ್ಕಳ ಭವಿಷ್ಯ ಉಳಿಸುವ ಹೋರಾಟದಲ್ಲಿ ಭಾಗಿಯಾಗಬೇಕು,” ಎಂದು ಕರೆ ನೀಡಿದರು.
ಎಸ್ಐಆರ್ ಕುರಿತು ಮಾತನಾಡಿದ ಅವರು, “ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಲಕ್ಷಾಂತರ ಜನರ ಮತದಾನದ ಹಕ್ಕಿಗೆ ಧಕ್ಕೆ ತರಲಾಗುತ್ತಿದೆ. ವಿಶೇಷವಾಗಿ ಸಮಾಜದ ಕೆಳವರ್ಗದ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಚುನಾವಣೆ ಆಯೋಗ ನೀಡಿರುವ ಅರ್ಜಿಯನ್ನು ಒಬ್ಬ ಅವಿದ್ಯಾವಂತ ವ್ಯಕ್ತಿಯಿಂದ ಭರ್ತಿ ಮಾಡಲು ಸಾಧ್ಯವೇ?” ಎಂದು ಪ್ರಶ್ನಿಸಿದರು.
“2022ರ ಮತದಾರರ ಪಟ್ಟಿ ಸಿಗುತ್ತಿಲ್ಲ. ಡಿಜಿಟಲ್ ಹುಡುಕಾಟದಲ್ಲೂ ಹೆಸರುಗಳು ಲಭ್ಯವಿಲ್ಲ. ಆನ್ಲೈನ್ ಮತ್ತು ಪಿಡಿಎಫ್ ಪಟ್ಟಿಗಳಲ್ಲೂ ಮಾಹಿತಿ ದೊರೆಯುತ್ತಿಲ್ಲ. ಕೆ.ಆರ್.ಪುರ ಕ್ಷೇತ್ರದಲ್ಲಿ ಸುಮಾರು 65 ಸಾವಿರ ಮತದಾರರ ಮನೆಗಳ ವಿಳಾಸವೇ ಪತ್ತೆಯಾಗುತ್ತಿಲ್ಲ ಎಂದು ಬಿಎಲ್ಒಗಳು ವರದಿ ನೀಡಿದ್ದಾರೆ. ಬಿಎಲ್ಒಗಳಿಗೂ ಸಮರ್ಪಕ ತರಬೇತಿ ಇಲ್ಲ. ಅವರಿಗೆ ನೀಡಿರುವ ಡಿಜಿಟಲ್ ಪಟ್ಟಿಯಲ್ಲೂ ಹೆಸರುಗಳಿಲ್ಲ. ಇಂತಹ ದುರಾಡಳಿತವನ್ನು ಕೇಂದ್ರ ಸರ್ಕಾರ ಜನರ ಮೇಲೆ ಹೇರುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಸಚಿವೆ ರಾಣಿ ಸತೀಶ್, “ನೀಟ್ ಹಗರಣವು ಇಂದು ವಿಶ್ವದ ಗಮನ ಸೆಳೆದಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ತೀವ್ರ ಹೋರಾಟ ನಡೆಯುತ್ತಿದೆ. ನೀಟ್ ಪ್ರಕರಣದಲ್ಲಿ 21 ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ. ಇದಕ್ಕೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.
“ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಪ್ರಧಾನಿ ನರೇಂದ್ರ ಮೋದಿ ಇದುವರೆಗೂ ಚಕಾರ ಎತ್ತಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ನೀಟ್ಗೆ ಸಂಬಂಧಿಸಿದಂತೆ 152 ಪ್ರಕರಣಗಳು ದಾಖಲಾಗಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ನೋವು ಅನುಭವಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅದು ಅವರ ಪಕ್ಷಕ್ಕೆ ಗೌರವ ತರುವ ನಿರ್ಧಾರವಾಗಲಿದೆ,” ಎಂದು ಹೇಳಿದರು.














