ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹನೂರು ಸಮೀಪದ ತೋಮಯ್ಯರಪಾಳ್ಯ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ನಿನ್ನೆ ಬೆಳಗಿನ ಜಾವ ಸುಮಾರು 5 ಗಂಟೆಗೆ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಅಡಗಿ ಕುಳಿತಿದ್ದ ನಾಲ್ವರು ತಮಿಳರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆಯಲ್ಲಿ ಮರಿಯಮಂಗಲಂ ಗ್ರಾಮದ ಅಂತೋಣಿಸಾಮಿ (50), ಜಾನ್ರೋಸ್ ಪೀಟರ್ (42) ಹಾಗೂ ಲಾಜರ್ ಕುಮಾರ್ (33) ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹಿಮೈ ದಾಸ್ (48) ಅವರನ್ನು ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಎಂ.ಕೆ. ಸ್ಟಾಲಿನ್, ಕರ್ನಾಟಕ ಅರಣ್ಯ ಪ್ರದೇಶದಲ್ಲಿ ಮೂವರು ತಮಿಳರನ್ನು ಅಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿ ಅನ್ಯಾಯವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಆಘಾತಕಾರಿ ಸಂಗತಿ ಎಂದು ಹೇಳಿದ್ದಾರೆ.
ಮಾನವ ಜೀವಗಳ ಬಗ್ಗೆ ಯಾವುದೇ ಮೌಲ್ಯವಿಲ್ಲದಂತೆ ನಡೆದಿರುವ ಈ ಕೃತ್ಯ ಖಂಡನೀಯ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನಗಳಲ್ಲಿ ಕರ್ನಾಟಕ ಅರಣ್ಯ ಇಲಾಖೆ ತೊಡಗಿದೆ ಎಂಬ ಆರೋಪಗಳಿದ್ದು, ಅಂತಹ ಪ್ರಯತ್ನಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈ ಪ್ರಕರಣವನ್ನು ಕೊಲೆ ಪ್ರಕರಣವಾಗಿ ದಾಖಲಿಸಿ, ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು. ಆಗ ಮಾತ್ರ ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ನಡೆಸಲು ಯಾರಿಗೂ ಧೈರ್ಯ ಬರುವುದಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
ಈ ಘಟನೆಯಲ್ಲಿ ಮೌನ ವಹಿಸದೆ, ಕರ್ನಾಟಕ ಸರ್ಕಾರದ ಮುಂದೆ ತಮಿಳುನಾಡು ಸರ್ಕಾರ ತನ್ನ ತೀವ್ರ ಖಂಡನೆಯನ್ನು ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ದೊರಕಿಸುವುದರ ಜೊತೆಗೆ, ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ತಮಿಳುನಾಡು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಎಂ.ಕೆ.ಸ್ಟಾಲಿನ್ ಒತ್ತಾಯಿಸಿದ್ದಾರೆ.














